Home Mangalorean News Kannada News ದೇವರ ಹೆಸರಲ್ಲಿ‌ ಶಾಸಕ ಸುನಿಲ್ ಕುಮಾರ್ ರಾಜಕೀಯ –  ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಾಗ್ದಾಳಿ

ದೇವರ ಹೆಸರಲ್ಲಿ‌ ಶಾಸಕ ಸುನಿಲ್ ಕುಮಾರ್ ರಾಜಕೀಯ –  ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಾಗ್ದಾಳಿ

Spread the love

ದೇವರ ಹೆಸರಲ್ಲಿ‌ ಶಾಸಕ ಸುನಿಲ್ ಕುಮಾರ್ ರಾಜಕೀಯ –  ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಾಗ್ದಾಳಿ

ಉಡುಪಿ: ದೇವರ ಹೆಸರಿನಲ್ಲಿ ರಾಜಕೀಯ ಮಾಡಿಕೊಂಡು ಬರುತ್ತಿರುವ ಕಾರ್ಕಳದ ಶಾಸಕ ಸುನಿಲ್ ಕುಮಾರ್, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಮೋಸ ಮಾಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ‌ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿ ಶಾಸಕ ಸುನಿಲ್ ಕುಮಾರ್ ಅವರು ಬಿದ್ದರೂ ಮೀಸೆ ಮಣ್ಣಾಗಿಲ್ಲ ಎಂಬ ಭಾವನೆಯಲ್ಲಿದ್ದಾರೆ.‌ ದೇವರ- ರಾಮನ ಹೆಸರಲ್ಲಿ ರಾಜಕೀಯ ಮಾಡುತ್ತಿದ್ದವರು, ಈಗ ಭಗವಂತನಿಗೆ ಮೋಸ ಮಾಡಿದ್ದಾರೆ. ಮೂರ್ತಿ ಕಂಚಿನದ್ದೋ ಅಥವಾ ಫೈಬರಿನದ್ದೊ‌ ಎಂಬುದು ಜಗಜ್ಜಾಹಿರಾಗಿದೆ. ಬಿಜೆಪಿಗೆ ಒಂದು ಸುಳ್ಳನ್ನು ಸಾವಿರ ಬಾರಿ ಹೇಳಿ ಸತ್ಯ ಮಾಡುವುದು ಕರಗತವಾಗಿದೆ ಎಂದು ಆರೋಪಿಸಿದರು.

ಈಗಲಾದರೂ ಉಡುಪಿ ಜಿಲ್ಲೆಯ ಜನತೆ ಎಚ್ಚೆತ್ತುಕೊಳ್ಳಬೇಕು. ಇವರು ದೇವರನ್ನೇ ಬಿಡ್ಲಿಲ್ಲ. ಇನ್ನು ಮನುಷ್ಯರು ಯಾವ ಲೆಕ್ಕ?. ಬಿಜೆಪಿ ಆಡಳಿತದ ಕೊನೆಯ ಕ್ಯಾಬಿನೆಟ್ ಸಭೆಯಲ್ಲಿ ಗೋಮಾಳದಲ್ಲಿ ಪರಶುರಾಮನ ಮೂರ್ತಿ ಸ್ಥಾಪನೆ ಮಾಡಬಾರದು ಎಂದು ನಿರ್ಧಾರ ತೆಗೆದುಕೊಳ್ಳಲಾಗಿತ್ತು. ಆ ಮೂರ್ತಿ ಕಾಮಗಾರಿ ಮುಂದುವರಿಸಬೇಕು ಎಂಬುದು ನಮ್ಮ ಆಶಯ. ಮೂರ್ತಿಯನ್ನು ಪೂರ್ಣಗೊಳಿಸುವುದು ನಮ್ಮ ಉದ್ದೇಶ ಎಂದು ಸಿಎಂ ಹೇಳಿದ್ದಾರೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.

ಬೈಂದೂರು ಶಾಸಕರ ವಿರುದ್ಧ ಅಸಮಾಧಾನ
ಬೈಂದೂರಿನಲ್ಲಿ ಕಾಂಗ್ರೆಸ್ – ಬಿಜೆಪಿ ಜಟಾಪಟಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಚಿವರು, ಹಕ್ಕುಚ್ಯುತಿ ಎಂದರೇನು ಎಂದು ಎರಡು ಬಾರಿ ಶಾಸಕಿಯಾದ ನನಗೂ ಗೊತ್ತು. ಅಧಿಕಾರದ ಲಾಭ ದುರ್ಲಾಭದ ಬಗ್ಗೆ ನನಗೂ ಸಾಮಾನ್ಯ ಜ್ಞಾನ ಇದೆ. ಯಾರ ಹಕ್ಕನ್ನ ಯಾರೂ ಕಸಿದುಕೊಳ್ಳಲು ಸಾಧ್ಯವಿಲ್ಲ ಎಂದು ತಿರುಗೇಟು ನೀಡಿದರು.

ಅಧಿಕಾರಿಗಳ ಸಭೆ ಎಲ್ಲಿ ಕರೀಬೇಕು, ಅಲ್ಲಿಯೇ ಕರೆಯಬೇಕು, ಏನೂ ತೊಂದರೆ ಆಗಲ್ಲ. ತನ್ನ ಖಾಸಗಿ ಸ್ಥಳದಲ್ಲಿ ಅಧಿಕಾರಿಗಳನ್ನು ಸಭೆಗೆ ಕರೆದರೆ ತೊಂದರೆಯಾಗುತ್ತದೆ. ಸರ್ಕಾರಿ ಕಾರ್ಯಕ್ರಮಗಳು ಸರ್ಕಾರಿ ಕಚೇರಿಯಲ್ಲಿ ಆಗುವುದೇ ಒಂದು ಪ್ರೊಟೋಕಾಲ್ ಎಂದು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ನಮ್ಮ ಸಿಎಂ ಹುಲಿ ಇದ್ದಂತೆ
ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ನಡೆದ ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಷಣದ ವೇಳೆ ಬುಲೆಟ್ ಪ್ರೂಫ್ ತೆಗೆಸಿದ್ದಕ್ಕೆ ಪ್ರತಿಕ್ರಿಯಿಸಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಕರ್ನಾಟಕ ರಾಜ್ಯ ಶಾಂತಿ ಪ್ರಿಯವಾಗಿದೆ. ಕರ್ನಾಟಕ ರಾಜ್ಯದಲ್ಲಿ ಬುಲೆಟ್ ಪ್ರೂಫ್ ಬೇಕಾ?. ನಮ್ಮ ಸಿದ್ದರಾಮಯ್ಯನವರು ಯಾವತ್ತೂ ಸ್ಟ್ರಾಂಗ್. ಅದರಲ್ಲಿ ಎರಡು ಮಾತಿಲ್ಲ‌ ಸಿದ್ದರಾಮಯ್ಯ ನವರಿಗೆ ಹುಲಿ ಎಂದು ಹೆಸರು ಬಂದಿರುವುದು ಇದಕ್ಕೆ ಎಂದರು.

ಟೋಲ್ ಗೇಟ್ ಸಮಸ್ಯೆಗೆ ಶೀಘ್ರ ಪರಿಹಾರ
ಕಂಚಿನಡ್ಕ ಬಳಿ ಟೋಲ್ ಗೇಟ್ ಗೆ ವಿರೋಧವಾಗಿರುವ ಬಗ್ಗೆ ನನಗೆ ಮಾಹಿತಿ ಬಂದಿದ್ದು, ನಾಲ್ಕು ಕಿಲೋಮೀಟರ್ ನಲ್ಲಿ ಎರಡು ಟೋಲ್ ಗೇಟ್ ಬಂದಿರುವುದು ಬಹಳ ಚರ್ಚೆಯಾಗುತ್ತಿದೆ. ಜಿಲ್ಲಾಧಿಕಾರಿ, ಎಸ್ ಪಿ, ಇತರ ಅಧಿಕಾರಿಗಳ ಜೊತೆ ನಾನು ಸ್ಥಳಕ್ಕೆ ಭೇಟಿಕೊಟ್ಟು ಪರಿಶೀಲನೆ ನಡೆಸುವೆ. ಅಲ್ಲಿರುವ ಸಮಸ್ಯೆ ಏನು ಎಂದು ನೋಡುತ್ತೇನೆ. ಎರಡು ಕಡೆ ಸುಂಕ ಕೊಡುವುದು ಜನರಿಗೆ ಸಮಸ್ಯೆಯಾಗುತ್ತದೆ. ಈ ಬಗ್ಗೆ ಸಂಬಂಧಪಟ್ಟ ಸಚಿವರ ಜೊತೆ ಮಾತನಾಡಿ ಸಮಸ್ಯೆ ಬಗೆಹರಿಸುತ್ತೇನೆ ಎಂದು ಹೇಳಿದರು.

ಸೋಮೇಶ್ವರ ಬೀಚ್ ಕಾಮಗಾರಿ ಪೂರ್ಣಗೊಳಿಸಲು ಸೂಚನೆ
ಮರವಂತೆ – ಸೋಮೇಶ್ವರ ಬೀಚ್ ಬಂದರು ಕಾಮಗಾರಿ ವಿಳಂಬವಾಗಿರುವುದು ನನ್ನ ಗಮನಕ್ಕೆ ಬಂದಿದ್ದು, ಈ ಸಂಬಂಧ ಗುತ್ತಿಗೆದಾರ ಬಿರಾದಾರ್ ಜೊತೆ ಮಾತನಾಡಿದ್ದೇನೆ. ಕಾಮಗಾರಿಗೆ ಚುರುಕು ಮುಟ್ಟಿಸುವ ಕೆಲಸ ಮಾಡುತ್ತೇವೆ. ನಿರ್ದಿಷ್ಟ ಅವಧಿಯಲ್ಲಿ ಕೆಲಸ ಮುಗಿಸಬೇಕು ಎಂದು ಸೂಚನೆ ನೀಡಲಾಗಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.


Spread the love

Exit mobile version