ಪಹಲ್ಗಾಮ್ ಭಯೋತ್ಪಾದಕ ದಾಳಿ: ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ ಖಂಡನೆ
ಉಡುಪಿ: ಜಮ್ಮು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಯಲ್ಲಿ 27 ಮಂದಿ ಅಮಾಯಕ ಪ್ರವಾಸಿಗರು ಮೃತಪಟ್ಟಿದ್ದಾರೆ. ಈ ಘಟನೆಯು ಅಮಾನವೀಯವಾಗಿದ್ದು ಇದನ್ನು ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ ತೀವ್ರವಾಗಿ ಖಂಡಿಸುತ್ತದೆ.
ಧರ್ಮದ ಹೆಸರಲ್ಲಿ ಕೊಲ್ಲುವ, ಹಿಂಸೆಯನ್ನು ಪ್ರಚೋದಿಸುವ ಕೃತ್ಯ ಖಂಡನಾರ್ಹವಾಗಿದ್ದು ಕೇಂದ್ರ ಗೃಹ ಇಲಾಖೆ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟದ ವಕ್ತಾರ ಇಕ್ಬಾಲ್ ಮನ್ನಾ ಆಗ್ರಹಿಸಿದ್ದಾರೆ.
ಮೃತರ ಕುಟುಂಬಕ್ಕೆ ತಮ್ಮ ಆಪ್ತರನ್ನು ಕಳೆದುಕೊಂಡ ದುಃಖವನ್ನು ಭರಿಸುವ ಶಕ್ತಿಯನ್ನು ದೇವನು ದಯಪಾಲಿಸಲಿಯೆಂದು ಈ ಸಂದರ್ಭದಲ್ಲಿ ಪ್ರಾರ್ಥಿಸುತ್ತೇವೆ ಎಂದು ಒಕ್ಕೂಟದ ಮಾಧ್ಯಮ ವಕ್ತಾರ ಇಕ್ಬಾಲ್ ಮನ್ನಾ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.