ಬಂಧನಕ್ಕೊಳಗಾದ ಮೀನುಗಾರರಿಗೆ ಕಾನೂನಿನ ಚೌಕಟ್ಟಿನಲ್ಲಿ ಜಾಮೀನು ಮಂಜೂರು ಮಾಡಿ: ಎಸ್ಪಿಗೆ ನವೀನ್ ಸಾಲಿಯಾನ್ ಮನವಿ
ಉಡುಪಿ: ಮಲ್ಪೆಯಲ್ಲಿ ನಡೆದ ಘಟನೆಯ ವಿಚಾರವಾಗಿ ಇಂದು ಸಂತ್ರಸ್ತ ಮಹಿಳೆ ಮಾಧ್ಯಮದ ಮುಂದೆ ಬಂದು ನೀಡಿದ ಹೇಳಿಕೆ ಅನುಸಾರ ಪ್ರಕರಣವನ್ನು ಮರು ಪರಿಶೀಲನೆಗೆ ಒಳಪಡಿಸಿ ಬಂಧನಕ್ಕೊಳಗಾದ ಮೀನುಗಾರಾರಿಗೆ ಕಾನೂನಿನ ಚೌಕಟ್ಟಿನಲ್ಲಿ ಜಾಮೀನು ಮಂಜೂರು ಮಾಡಲು ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ, ಜಿಲ್ಲಾಧಿಕಾರಿಗಳಿಗೆ,ಹಾಗೂ ಸರ್ಕಾರಕ್ಕೆ ನವೀನ್ ಸಾಲಿಯಾನ್ ಮನವಿ ಮಾಡಿದ್ದಾರೆ
ಘಟನೆ ನಡೆದ ದಿನ ಎರಡೂ ಕಡೆಯವರನ್ನು ಠಾಣೆಗೆ ಕರೆಸಿ ಮೀನುಗಾರ ಸಮಕ್ಷಮದಲ್ಲಿ ರಾಜಿ ಮಾಡಲಾಗಿತ್ತು. ಇಲ್ಲಿ ಎರಡು ಪಾರ್ಟಿಯವರೂ ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದರು. ಹಾಗೂ ಠಾಣಾಧಿಕಾರಿಗಳು ಎರಡೂ ಕಡೆಯವರಿಂದ ತಪ್ಪೊಪ್ಪಿಗೆ ಹಿಂಬರಹ ಬರೆಸಿಕೊಂಡು ಸೌಹಾರ್ದಯುತವಾಗಿ ಪ್ರಕರಣ ಇತ್ಯರ್ಥಗೊಳಿಸಿದ್ದರು.
ಈಗಾಗಲೇ ಪ್ರಕರಣದ ಕುರಿತು ಸಂತ್ರಸ್ತ ಮಹಿಳೆ ಮಾಧ್ಯಮದ ಮುಖಾಂತರ ಮೀನುಗಾರರ ಮಹಿಳೆಯರಿಗೆ ನಮ್ಮ ಮೇಲೆ ದ್ವೇಷ ಇಲ್ಲ ಹಾಗೂ ನನಗೆ ಅವರ ಮೇಲೆ ದ್ವೇಷ ಇಲ್ಲ ಎಂದು ಹೇಳಿಕೆ ನೀಡಿರುತ್ತಾರೆ,ಹಾಗೂ ಕೊರೊನಾ ಸಮಯದಲ್ಲೂ ಕೂಡ ನಮಗೆ ಮೀನುಗಾರರು ಸಹಾಯ ಮಾಡಿರುತ್ತಾರೆ ಎನ್ನುದನ್ನು ಕೂಡ ಸ್ಪಷ್ಟ ಪಡಿಸಿದ್ದಾರೆ.
ಆದರೆ ಘಟನೆಯ ವಿಡಿಯೋ ಚಿತ್ರೀಕರಣವನ್ನು ವೈಭವೀಕರಿಸಿದ ನಂತರ ಪೊಲೀಸ್ ಇಲಾಖೆ ಮುಂದುವರೆದು ಅಮಾಯಕ ಮೀನುಗಾರರ ಮೇಲೆ ಅಟ್ರಾಸಿಟಿ ಕಾಯ್ದೆ ಅಡಿಯಲ್ಲಿ ಕೇಸ್ ದಾಖಲಿಸಿ ಬಂಧಿಸಿರುವುದು ಸರಿಯಲ್ಲ. ಪ್ರಕರಣದಲ್ಲಿ ಭಾಗಿಯಾಗದವರನ್ನು ಬಂಧಿಸಿರುವುದರಿಂದ ಮೀನುಗಾರರು ಅಭದ್ರತೆಗೆ ಒಳಗಾಗಿದ್ದಾರೆ. ಈ ಘಟನೆ ಉದ್ದೇಶ ಪೂರ್ವಕವಾಗಿರದೆ ಕ್ಷಣಿಕ ಸಿಟ್ಟಿನಿಂದ ನಡೆದ ಘಟನೆಯಾಗಿದೆ.
ಕಳೆದ ಅನೇಕ ವರ್ಷಗಳಿಂದ ಮತ್ತ್ವಕ್ಷಾಮದಿಂದ ಮೀನುಗಾರಿಕೆ ಕುಂಠಿತಗೊಂಡು ಮೀನುಗಾರರು ನಷ್ಟ ಅನುಭವಿಸುತ್ತಿದ್ದಾರೆ. ಇದರ ನಡುವೆ ಮಲ್ಪೆ ಬಂದರಿನಲ್ಲಿ ನಿರಂತರವಾಗಿ ಮೀನು ಕಳ್ಳತನ ಹಾಗೂ ಮೀನುಗಾರಿಕಾ ಸಲಕರಣೆಗಳಾದ ಬೋಟಿನ ಪ್ಯಾನ್, ಬ್ಯಾಟರಿ, ಜಿಪಿಎಸ್, ವೈಯರ್ಲೆಸ್, ಫಿಶ್ ಪೈಂಡರ್, ಬಲೆ ಸಾಮಗ್ರಿಗಳು ಕಳ್ಳತನವಾಗುತ್ತಿದ್ದರಿಂದ ಇಲ್ಲಿನ ಜನ ಆಕ್ರೋಶ ಭರಿತರಾಗಿದ್ದರು. ಮುಂದಿನ ಮಲ್ಪೆ ಬಂದರಿನಲ್ಲಿ ನಿರಂತರವಾಗಿ ನಡೆಯುತ್ತಿರುವ ಕಳ್ಳತನಕ್ಕೆ ಕಡಿವಾಣ ಹಾಕಲು ಪೊಲೀಸ್ ಇಲಾಖೆ ಹಾಗೂ ಮೀನುಗಾರಿಕಾ ಇಲಾಖೆ ಕಠಿಣವಾದ ಕ್ರಮಗಳನ್ನು ಕೈಗೊಳ್ಳಬೇಕು ಹಾಗೂ ಈ ಪ್ರಕರಣವನ್ನು ಸೌಹಾರ್ದಯುತವಾಗಿ ಬಗೆಹರಿಸಿ ಮೀನುಗಾರರಿಗೆ ರಕ್ಷಣೆ ನೀಡಬೇಕು ಬಂಧಿಸಲ್ಪಟ್ಟ ಮೀನುಗಾರರಿಗೆ ಜಾಮೀನು ಮಂಜೂರು ಮಾಡಬೇಕೆಂದು ಸರಕಾರವನ್ನು ,ಜಿಲ್ಲಾಧಿಕಾರಿಯನ್ನು ಹಾಗೂ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಯವರನ್ನು ಒತ್ತಾಯಿಸಿದ್ದಾರೆ.