ಸರ್ಕಾರಿ ಕಾರನ್ನು ಪ್ರತಿಭಟನಕಾರರು ಬಳಸಿರುವ ಕುರಿತ ಸುದ್ದಿಗೆ ನಗರ ಪೊಲೀಸ್ ಆಯುಕ್ತರ ಸ್ಪಷ್ಟನೆ
ಮಂಗಳೂರು: ನಗರದ ಅಡ್ಯಾರ್ ಕಣ್ಣೂರು ಬಳಿಯ ಷಾ ಗಾರ್ಡನ್ ಮೈದಾನದಲ್ಲಿ ಎಪ್ರಿಲ್ 18 ರಂದು ನಡೆದ ಪ್ರತಿಭಟನಾ ಸಮಾವೇಶದ ಸಮಯದಲ್ಲಿ ಪೊಲೀಸ್ ಅಧಿಕಾರಿಯವರ ಸರ್ಕಾರಿ ಕಾರನ್ನು ಪ್ರತಿಭಟನಕಾರರು ಬಳಸಿರುವ ಕುರಿತು ದೃಶ್ಯ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿರುವ ಕುರಿತು ನಗರ ಪೊಲೀಸ್ ಆಯುಕ್ತರು ಸ್ಪಷ್ಟನೆ ನೀಡಿದ್ದಾರೆ.
ಎಪ್ರಿಲ್ 18 ರಂದು ಸಂಚಾರ ಬಂದೋಬಸ್ತು ಕರ್ತವ್ಯದಲ್ಲಿದ್ದ ಎ.ಸಿ.ಪಿ ಸಂಚಾರ ಉಪ ವಿಭಾಗರವರು. ಪಡೀಲ್ ಕಡೆಯಿಂದ ಕಾರ್ಯಕ್ರಮದ ಸ್ಥಳದ ಕಡೆಗೆ ತಮ್ಮ ಇಲಾಖಾ ವಾಹನ ಮೂಲಕ ಬಂದು ಇಳಿದು ಅಲ್ಲಿ ಮುಖ್ಯ ದ್ವಾರದ ಬಳಿ ಸಂಚಾರ ನಿಯಂತ್ರಣ ಕರ್ತವ್ಯ ನಿರ್ವಹಿಸಿ, ನಂತರ ಕಾರ್ಯಕ್ರಮ ಮುಗಿದ ಬಳಿಕ ಎಸಿಪಿ ರವರು ಮಂಗಳೂರು ನಗರ ಕಡೆಗೆ ಸಂಚಾರ ನಿಯಂತ್ರಿಸುವ ಕರ್ತವ್ಯಕ್ಕೆ ಬರಲು ಹೆದ್ದಾರಿಯ ರಸ್ತೆ ವಿಭಜಕ ದಾಟಿ ಅವರ ಚಾಲಕರಿಗೆ ಮುಂದೆ ಅಡ್ಯಾರು ಕಟ್ಟೆ ಬಳಿ ಯು ಟರ್ನ್ ಮಾಡಿ ವಾಪಾಸ್ಸು ಬರಲು ಸೂಚಿಸಿರುತ್ತಾರೆ.
ವಾಹನ ಚಾಲಕರಾದ ಬೈರೇಗೌಡರವರು ಅಡ್ಯಾರು ಕಟ್ಟೆ ಬಳಿ ಬ್ಯಾರಿಕೇಡ್ ಹಾಕಿದ್ದ ಕಾರಣ ಸಹ್ಯಾದ್ರಿ ಕಡೆ ಹೋಗುತ್ತಿದ್ದರು. ಸ್ವಲ್ಪ ಸಮಯದ ಹಿಂದೆ ಅಡ್ಯಾರ್ ಗಾರ್ಡನ್ ಬಳಿ ಸುಮಾರು 19.30 ಗಂಟೆಗೆ ಟೆಂಪೋ ಟ್ರಾವೆಲರ್ ವಾಹನ ಚಾಲಕನು ಅತೀ ವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿ ಕಾರ್ಯಕ್ರಮ ಮುಗಿಸಿ ನಡೆದುಕೊಂಡು ಹೋಗುತ್ತಿದ್ದ ಬಾಲಕನಿಗೆ (16 ವರ್ಷ) ಡಿಕ್ಕಿ ಹೊಡೆದು ಬಲಕಾಲಿನ ಪಾದದ ಮೇಲೆ ಚಕ್ರ ಹಾದುಹೋದ ಪರಿಣಾಮ ಗಾಯಗೊಂಡು ಸುಮಾರು ಜನ ಸೇರಿದ್ದರು. ಅಲ್ಲೇ ಪಕ್ಕದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇಬ್ಬರು ಮಹಿಳಾ ಪೊಲೀಸ್ ಸಿಬ್ಬಂದಿಗಳು ಮತ್ತು ಗಾಯಾಳುವಿನ ಕಡೆಯವರು ಎಸಿಪಿ ರವರ ವಾಹನವನ್ನು ನಿಲ್ಲಿಸಿ, ಗಾಯಾಳುವನ್ನು ಚಿಕಿತ್ಸೆಗಾಗಿ ಕಳುಹಿಸಿಕೊಟ್ಟಿರುತ್ತಾರೆ. ನಂತರ ಸದರಿ ಗಾಯಾಳುವನ್ನು ಜನಪ್ರಿಯ ಆಸ್ಪತ್ರೆಯಲ್ಲಿ ದಾಖಲಿಸಿದ್ದಾಗಿರುತ್ತದೆ. ಅಪಘಾತ ಮಾಡಿರುವ ಟೆಂಪೋ ಟ್ರಾವೆಲರ್ ಸಂಖ್ಯೆ: ಕೆ.ಎ. 70 9888 ಮತ್ತು ಅದರ ಚಾಲಕನನ್ನು ಸಿಬ್ಬಂದಿ ಆನಂದ ಎಂಬವರ ಮೂಲಕ ಮಂಗಳೂರು ದಕ್ಷಿಣ ಸಂಚಾರ ಪೊಲೀಸ್ ಠಾಣೆಗೆ ಕಳುಹಿಸಿಕೊಟ್ಟಿದ್ದು, ಇದರ ಸಂಬಂಧ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿರುತ್ತದೆ.
ಅಪಘಾತ ನಡೆಯುವ ಸಮಯದಲ್ಲಿ ಕಾರ್ಯಕ್ರಮ ಪ್ರಯುಕ್ತ ಸದರಿ ಹೆದ್ದಾರಿಯಲ್ಲಿ ಸಂಚಾರ ದಟ್ಟಣೆ ಹೆಚ್ಚಾಗಿದ್ದು, ಅಪಘಾತಕ್ಕೀಡಾದ ಗಾಯಾಳುವನ್ನು ಚಿಕಿತ್ಸೆ ಕೊಡಿಸುವ ಸಲುವಾಗಿ ಅಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇಬ್ಬರು ಮಹಿಳಾ ಸಿಬ್ಬಂದಿಯವರು ಅದೇ ಸಮಯಕ್ಕೆ ಬರುತ್ತಿದ್ದ ಎಸಿಪಿರವರ ವಾಹನದ ಸಹಾಯದಿಂದ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಿರುವುದಾಗಿದೆ. ಅಪಘಾತದಲ್ಲಿ ಗಾಯವಾದಾಗ ಪ್ರಥಮ ಚಿಕಿತ್ಸೆ (ಗೋಲ್ಡನ್ ಹವರ್) ಕೊಡಿಸುವುದು ಪೊಲೀಸರ ಆದ್ಯ ಕರ್ತವ್ಯವಾಗಿದ್ದು, ಪೊಲೀಸರು ಘಟನೆಯನ್ನು ನೋಡಿ ತಕ್ಷಣ ಕಾರ್ಯ ಪ್ರವೃತ್ತರಾಗಿ ಆಸ್ಪತ್ರೆಗೆ ಪೊಲೀಸ್ ಜೀಪಿನ ಚಾಲಕನೊಂದಿಗೆ ಕಳುಹಿಸಿ ಸದರಿ ಮಹಿಳಾ ಸಿಬ್ಬಂದಿಯವರು ಕರ್ತವ್ಯ ಮುಂದುವರಿಸಿರುತ್ತಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.