ಆರೋಗ್ಯ – ಶಿಕ್ಷಣ ಕ್ಷೇತ್ರಕ್ಕೆ ಬಜೆಟ್ ನ ಘೋಷಣೆಗಳು ಕ್ರಾಂತಿಕಾರಿ ಹೆಜ್ಜೆಯಾಗಿವೆ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
- ಬಜೆಟ್ ಮೇಲೂ ಬಿಜೆಪಿ ತನ್ನ ಕೋಮುವಾದಿ ಮನೋಭಾವ ಪ್ರದರ್ಶಿಸುವುದು ಸರಿಯಲ್ಲ
- ಗ್ಯಾರಂಟಿ ಯೋಜನೆಗಳ ಯಶಸ್ವಿ ಅನುಷ್ಠಾನದಿಂದಾಗಿ ಬಿಜೆಪಿಗೆ ಏನು ಹೇಳಬೇಕು ಗೊತ್ತಾಗುತ್ತಿಲ್ಲ
ಸಾಮಾಜಿಕ ನ್ಯಾಯದ ಜೊತೆಗೆ ಆರೋಗ್ಯ ಶಿಕ್ಷಣಕ್ಕೆ ಸಿದ್ದರಾಮಯ್ಯ ಅವರು ಬಜೆಟ್ ಹೆಚ್ಚು ಒತ್ತು ನೀಡಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ವಿಧಾನ ಸಭೆಯಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಅವರು ಬಜೆಟ್ ಮಂಡನೆ ಬಳಿಕ ವಿಧಾನ ಸೌಧದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಸಚಿವರು, ಆರೋಗ್ಯ ಶಿಕ್ಷಣ ಕ್ಷೇತ್ರದಲ್ಲಿ ಕೆಲವು ಕ್ರಾಂತಿಕಾರಿ ಹೆಜ್ಜೆಗಳನ್ನ ಇಡಲಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿ ಅನುಷ್ಠಾನ ಆಗಿವೆ. ಬಜೆಟ್ ನಲ್ಲಿ ಗ್ರಾಮೀಣಾಭಿವೃದ್ಧಿಗೆ ಒತ್ತು ನೀಡುವುದರ ಜೊತೆಗೆ ಬೆಂಗಳೂರು ಅಭಿವೃದ್ಧಿಗೆ 7 ಸಾವಿರ ಕೋಟಿ ಕೊಟ್ಟಿದ್ದಾರೆ. ಆಶಾ ಕಾರ್ಯಕರ್ತೆಯರಿಗೆ ಒಂದು ಸಾವಿರ ವೇತನ ಹೆಚ್ಚಿಸಿದ್ದಾರೆ. ಅರ್ಚಕರ ವೇತನ ಕೂಡ ವಾರ್ಷಿಕ 62 ಸಾವಿರಕ್ಕೆ ಹೆಚ್ಚಿಸಲಾಗಿದೆ. ಆಡಳಿತಾತ್ಮಕ ಸುಧಾರಣೆ, ಹಣಕಾಸಿನ ಸುವ್ಯವಸ್ಥೆ ಬಜೆಟ್ ನಲ್ಲಿ ಎದ್ದು ಕಾಣುತ್ತಿದೆ.
ಹಲಾಲ್ ಬಜೆಟ್ ಎನ್ನುವ ಬಿಜೆಪಿಗರಿಗೆ ಬೇರೆ ಏನೂ ಕಾಣಿಸುತ್ತಿಲ್ಲ.. ವಿರೋದ ಪಕ್ಷಕ್ಕೆ ಮಾತಾಡಲು ಬೇರೆ ವಿಷಯ ಇಲ್ಲ. ಹೀಗಾಗಿ ಜನರ ದಾರಿ ತಪ್ಪಿಸುವ ಹೇಳಿಕೆ ಕೊಡ್ತಿದ್ದಾರೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಆರೋಗ್ಯ ಇಲಾಖೆಗೆ ಕ್ರಾಂತಿಕಾರಿ ಬಜೆಟ್ ಇದಾಗಿದೆ. ಗ್ರಾಮೀಣ ಪ್ರದೇಶದ ಜನರ ಆರೋಗ್ಯ ರಕ್ಷಣೆಗೆ 100 ಕೋಟಿ ಅನುದಾನದಲ್ಲಿ ಗೃಹ ಆರೋಗ್ಯ ಯೋಜನೆಯನ್ನ ರಾಜ್ಯಾದ್ಯಂತ ವಿಸ್ತರಿಸುವ ಘೋಷಣೆ ಮಾಡಲಾಗಿದೆ. ತಾಯಿ ಮಗುವಿನ ಮರಣ ಪ್ರಮಾಣವನ್ನ ಶೂನ್ಯಕ್ಕಿಳಿಸಲು 320 ಕೋಟಿ ಅನುದಾನ ಯೋಜನೆ ಘೋಷಿಸಿದ್ದಾರೆ. 108 ಅಂಬ್ಯುಲೆನ್ಸ್ ವ್ಯವಸ್ಥೆಯಲ್ಲಿ ಸುಧಾರಣೆ ತರುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯಿಂದಲೇ ವ್ಯವಸ್ಥೆ ಜಾರಿಗೊಳಿಸಲು ‘ಆರೋಗ್ಯ ಕವಚ’ ಬಲಪಡಿಸುವ ಯೋಜನೆ ಘೋಷಿಸಲಾಗಿದೆ. ರಾಜ್ಯದ 3 ಲಕ್ಷ ನೌಕರರಿಗೆ 5 ಲಕ್ಷದ ವರೆಗೆ ನಗದು ರಹಿತ ಚಿಕಿತ್ಸೆ ಒದಗಿಸುವ ಯೋಜನೆ ಘೋಷಿಸಿಲಾಗಿದೆ. ಆಶಾ ಕಾರ್ಯಕರ್ತರಿಗೆ 1000 ಸಾವಿರ ವೇತನ ಹೆಚ್ಚಿಸುವ ಘೋಷಣೆಯಾಗಿದೆ. ಸಾಂಕ್ರಾಮಿಕ ರೋಗಗಳ ತಡೆಗೆ 50 ಕೋಟಿಯಲ್ಲಿ ವಿಶೇಷ ಅಭಿಯಾನ ಕಾರ್ಯಕ್ರಮವನ್ನ ನೀಡಿದ್ದಾರೆ. ಕಂದಾಯ, ಆರೋಗ್ಯ ಇಲಾಖೆ ಸೇರಿದಂತೆ ಎಲ್ಲ ಇಲಾಖೆಯಲ್ಲಿ ಪಾರದರ್ಶಕತೆ ವರ್ಗಾವಣೆ ಆಡಳಿತವನ್ನ ತರಲಾಗುತ್ತಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಇದು ರಾಜ್ಯದ ಹಿತ ಕಾಪಾಡುವ ಬಜೆಟ್ ಆಗಿದೆ. ವಿರೋಧ ಪಕ್ಷವಾಗಿ ಬಿಜೆಪಿಗೆ ಏನು ಹೇಳಬೇಕು ಎಂದು ಗೊತ್ತಾಗುತ್ತಿಲ್ಲ. ಜಿಎಸ್ ಟಿಯಲ್ಲಿ ದೇಶದಲ್ಲಿ 2 ನೇ ಸ್ಥಾನದಲ್ಲಿ ಕರ್ನಾಟಕ ಇದೆ. ಆದರೆ ರಾಜ್ಯಕ್ಕೆ ಕೇಂದ್ರದಿಂದ ತೆರಿಗೆ ಪಾಲಿನಲ್ಲಿ ಅನ್ಯಾಯ ಆಗುತ್ತಿದ್ರೂ ಬಿಜೆಪಿ ನಾಯಕರು ಕೇಂದ್ರ ಸರ್ಕಾರದ ವಿರುದ್ಧ ಬಾಯಿ ಬಿಟ್ಟು ಏನನ್ನು ಹೇಳಲಾಗದೆ ಸಿಎಂ ಸಿದ್ದರಾಮಯ್ಯ ಅವರ ಉತ್ತಮ ಕೆಲಸಗಳನ್ನು ಟೀಕಿಸುತ್ತಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಭಿಪ್ರಾಯ ವ್ಯಕ್ತಪಡಿಸಿದರು.