ಇಂದ್ರಾಳಿ ಮೇಲ್ಸೇತುವೆಗಾಗಿ ಏಪ್ರಿಲ್ ಫೂಲ್ ಹೋರಾಟ: ಕಾಮಗಾರಿ ವಿಳಂಬ ನೀತಿ ವಿರುದ್ಧ ವಿಶಿಷ್ಟ ಪ್ರತಿಭಟನೆ
ಉಡುಪಿ: ರಾಷ್ಟ್ರೀಯ ಹೆದ್ದಾರಿ ಹೋರಾಟ ಸಮಿತಿ ಇವರ ನೇತೃತ್ವದಲ್ಲಿ ಮಂಗಳವಾರದಂದು ಇಂದ್ರಾಳಿ ರೈಲ್ವೆ ಮೇಲ್ಸೇತುವೆ ಕಾಮಗಾರಿ ವಿಳಂಬವಾಗುತ್ತಿದ್ದು ಜಿಲ್ಲೆಯ ಸಂಸದರು, ಅಧಿಕಾರಿಗಳು ಹಾಗೂ ಜಿಲ್ಲಾಡಳಿತ ಜಿಲ್ಲೆಯ ಜನರನ್ನು ನಿರಂತರವಾಗಿ ಮೂರ್ಖರನ್ನಾಗಿಸುತ್ತಿರುವುದನ್ನು ಜನತೆಗೆ ವಿವರಿಸಲು ಎಪ್ರಿಲ್ ಫೂಲ್ ದಿನಾಚರಣೆಯನ್ನು ವಿಶಿಷ್ಟವಾಗಿ ಆಚರಿಸಲಾಯಿತು. ಮದ್ಯಾಹ್ನ ಕಲ್ಸಂಕದಿಂದ ಇಂದ್ರಾಳಿಯ ತನಕ ಬೃಹತ್ ಪ್ರತಿಭಟನಾ ಮೆರವಣಿಗೆ ಹಾಗೂ ಏಪ್ರಿಲ್ ಫೂಲ್ ದಿನಾಚರಣೆ ಕೂಡ ನಡೆಯಿತು.
ಕಳೆದ ಹಲವು ವರ್ಷಗಳಿಂದ ತೀರಾ ನಿಧಾನಗತಿಯಲ್ಲಿ ಸಾಗುತ್ತಿರುವ ಇಂದ್ರಾಳಿಯ ರಾಷ್ಟ್ರೀಯ ಹೆದ್ದಾರಿ ರೈಲ್ವೆ ಸೇತುವೆ ಕಾಮಗಾರಿ ವಿರುದ್ಧ ಜನಾಕ್ರೋಶ ಕಂಡು ಬಂತು. ಪ್ರತಿಭಟನಾಕಾರರು ನಿಧನಗತಿ ಕಾಮಗಾರಿ ವಿರುದ್ಧ ತಲೆಬೋಳಿಸಿ, ಭಿಕ್ಷಾಟನೆ ಮಾಡಿ ಮೆರವಣಿಗೆ ನಡೆಸಿದರು. ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಕಲ್ಸಂಕ ಜಂಕ್ಷನ್ ನಲ್ಲಿ ಭಿಕ್ಷುಕನ ವೇಷ ಧರಿಸಿದ್ಧ ಕರ್ನಾಟಕ ರಕ್ಷಣಾ ವೇದಿಕೆಯ ಅನ್ಸಾರ್ ಅಹಮದ್ ಅವರಿಗೆ ಸಾಂಕೇತಿಕವಾಗಿ ಭಿಕ್ಷೆ ನೀಡುವುದರ ಮೂಲಕ ಪ್ರತಿಭಟನಾ ಮೆರವಣೆಗೆಗೆ ಚಾಲನೆ ನೀಡಿದರು. ಉಡುಪಿ ನಗರ ರಾಷ್ಟ್ರೀಯ ಹೆದ್ದಾರಿ ಹೋರಾಟ ಸಮಿತಿಯ ಪ್ರಧಾನ ಕಾರ್ಯದರ್ಶಿ ಅಮೃತ್ ಶೆಣೈ ಅವರು ತಲೆ ಬೋಳಿಸಿ ಆಕ್ರೋಶ ಹೊರಹಾಕಿದರು. ಪ್ರತಿಭಟನಾ ಸಭೆಯಲ್ಲಿ ವಿವಿಧ ರಾಜಕೀಯ ಮುಖಂಡರು ತೀರಾ ನಿಧಾನಗತಿಯಲ್ಲಿ ಸಾಗುತ್ತಿರುವ ಇಂದ್ರಾಳಿಯ ರಾಷ್ಟ್ರೀಯ ಹೆದ್ದಾರಿ ರೈಲ್ವೆ ಸೇತುವೆ ಕಾಮಗಾರಿಯ ಕುರಿತು ನಿರ್ಲಕ್ಷ್ಯ ವಹಿಸಿದ ಕೇಂದ್ರ ಸರಕಾರ ಹಾಗೂ ಸ್ಥಳೀಯ ಸಂಸದರ ವಿರುದ್ದ ತಮ್ಮ ಆಕ್ರೋಶವನ್ನು ಹೊರಹಾಕಿದರು. ಇಂದ್ರಾಳಿಯಲ್ಲಿ ಪ್ರತಿಭಟನಾ ಸಭೆ ನಡೆಸಿ, ಕೇಂದ್ರ ಸರಕಾರದ ವೈಫಲ್ಯವನ್ನು ವಿರೋಧಿಸಲಾಯಿತು.
ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ ಮಾತನಾಡಿ ರೈಲ್ವೆ ಇಲಾಖೆ ಹಾಗೂ ರಾಷ್ಟ್ರೀಯ ಹೆದ್ದಾರಿ ಇಲಾಖೆ ನಡುವಿನ ಹೊಂದಾಣಿಕೆ ಕೊರತೆಯಿಂದ ಇಂದ್ರಾಳಿ ರೈಲ್ವೆ ಸೇತುವೆ ಕಾಮಗಾರಿ ವಿಳಂಬ ವಾಗಿದೆ. ಈ ವಿಳಂಬದಿಂದಾಗಿ ನಿರ್ಮಾಣ ವೆಚ್ಚ ಕೂಡ ಜಾಸ್ತಿ ಯಾಗಿ ಸರಕಾರಕ್ಕೆ ದೊಡ್ಡ ನಷ್ಟವಾಗುತ್ತಿದೆ. ಈ ಎರಡು ಇಲಾಖೆಗಳ ಮಧ್ಯೆ ಹೊಂದಾಣಿಕೆ ಮೂಡಿಸುವ ಕಾರ್ಯವನ್ನು ನಮ್ಮ ಸಂಸದರು ಮಾಡ ಬೇಕಿತ್ತು. ಆದರೆ ಇವರು ಪ್ರತಿ ಬಾರಿಯೂ ಒಂದು ತಿಂಗಳ ಗಡುವು ನೀಡಿ ಕಾಮಗಾರಿ ಮುಗಿಸುವುದಾಗಿ ಸುಳ್ಳು ಭರವಸೆಯನ್ನು ನೀಡುತ್ತಿದ್ದಾರೆ. ಇದರಿಂದ ಅದೆಷ್ಟೋ ಮಂದಿ ಇಲ್ಲಿ ಜೀವ ಕಳೆದುಕೊಂಡಿದ್ದಾರೆ ಎಂದು ಅವರು ದೂರಿದರು.
ಉಡುಪಿ ನಗರ ರಾಷ್ಟ್ರೀಯ ಹೆದ್ದಾರಿ ಹೋರಾಟ ಸಮಿತಿ ಪ್ರಧಾನ ಸಂಚಾಲಕರಾದ ಅಮೃತ್ ಶೆಣೈ ಮಾತನಾಡಿ ಇಂದ್ರಾಳಿ ಸೇತುವೆ ಕಾಮಗಾರಿ ವಿಳಂಬದಿಂದ ಅನೇಕ ಅಪಘಾತಗಳು ಸಂಭವಿಸಿ ಹಲವು ಮಂದಿ ಜೀವ ಕಳೆದುಕೊಂಡಿದ್ದಾರೆ. ಆದರೂ ಕೇಂದ್ರ ಸರಕಾರ ಕಿವುಡಾಗಿದೆ ಮತ್ತು ಕುರುಡು ಆಗಿದೆ. ನಮ್ಮ ಸಂಸದರು ಅಗತ್ಯವೇ ಇಲ್ಲದ ರೀತಿ ವರ್ತಿಸುತ್ತಿದ್ದಾರೆ. ಶೋಭಾ ಅವರ ಹಾದಿಯಲ್ಲಿಯೇ ಕೋಟ ಶ್ರೀನಿವಾಸ ಪೂಜಾರಿ ಕೂಡ ಸಾಗುತ್ತಿದ್ದಾರೆ. ಸರಕಾರದ ವಿರುದ್ಧ ನಮ್ಮ ಆಕ್ರೋಶ ವ್ಯಕ್ತಪಡಿಸಲು ಈ ಹೋರಾಟ ಮಾಡುತ್ತಿದ್ದೇವೆ. ಈ ವಿಚಾರದಲ್ಲಿ ಅಸಹಾಯಕ ರಾಗಿರುವ ಸಂಸದರು, ನಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ, ಚುನಾವಣೆ ಎದುರಿಸಲಿ’ಎಂದು ಹೇಳಿದರು.
ಪ್ರತಿಭಟನೆಯ ಕೊನೆಯಲ್ಲಿ ಪ್ರತಿಭಟನಾಕಾರರು “ಎಪ್ರಿಲ್ ಫೂಲ್” ಆಚರಿಸಿ ಪ್ರಧಾನಿ ನರೇಂದ್ರ ಮೋದಿ, ಸಂಸದೆ ಶೋಭಾ ಕರಂದ್ಲಾಜೆ, ಸಂಸದ ಕೋಟ ಶ್ರೀನಿವಾಸ್ ಪೂಜಾರಿಯವರ ಮುಖವಾಡ ಧರಿಸಿ ಸೇತುವೆ ಉದ್ಘಾಟಿಸುವ ಅಣಕು ಪ್ರದರ್ಶನ ನಡೆಸಿದರು
ಈ ವೇಳೆ ಮೆರವಣಿಗೆಯಲ್ಲಿ ಅನ್ಸಾರ್ ಅಹ್ಮದ್ ಸಂಗ್ರಹಿಸಿದ ಹಣವನ್ನು ಮೋದಿಯವರಿಗೆ ನೀಡುವ ಮೂಲಕ ಕೇಂದ್ರ ಸರಕಾರದ ವಿಳಂಬ ನೀತಿಯನ್ನು ಅಣಕಿಸಲಾಯಿತು.ನಂತರ ಮೋದಿ ಸೇತುವೆಯನ್ನು ಉದ್ಘಾಟಿಸುವ ಮೂಲಕ ಏಪ್ರಿಲ್ ಫೂಲ್ ಆಚರಿಸಲಾಯಿತು. ಕಳೆದ ಏಳೆಂಟು ವರ್ಷಗಳಿಂದ ಉಡುಪಿ ಜನತೆಯನ್ನು ಸಂಸದರು ಮೂರ್ಖರನ್ನಾಗಿ ಮಾಡಿರುವ ಬಗ್ಗೆ ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿ ದರು. ಇದೇ ವೇಳೆ ಪ್ರತಿಭಟನಕಾರರು ಕೆಲವೊತ್ತು ಇಂದ್ರಾಳಿ ರಾಷ್ಟ್ರೀಯ ಹೆದ್ದಾರಿಯನ್ನು ತಡೆದು ಕೇಂದ್ರ ಸರಕಾರ ಹಾಗೂ ಸಂಸದರ ವಿರುದ್ಧ ಘೋಷಣೆಗಳನ್ನು ಕೂಗಿದರು.
ಸಭೆಯಲ್ಲಿ ಮಾಜಿ ಸಚಿವರಾದ ಜಯಪ್ರಕಾಶ್ ಹೆಗ್ಡೆ, ವಿನಯ ಕುಮಾರ್ ಸೊರಕೆ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ ಕುಮಾರ್ ಕೊಡವೂರು, ಕಾರ್ಯಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲು, ಸಿಪಿಎಂ ಮುಖಂಡ ಬಾಲಕೃಷ್ಣ ಶೆಟ್ಟಿ, ವೆಲ್ಫೇರ್ ಪಾರ್ಟಿಯ ಉಡುಪಿ ಜಿಲ್ಲಾಧ್ಯಕ್ಷ ಇದ್ರಿಸ್ ಹೂಡೆ, ಸಮಿತಿಯ ಅಧ್ಯಕ್ಷ ಕೀರ್ತಿ ಶೆಟ್ಟಿ, ಪ್ರಧಾನ ಸಂಚಾಲಕ ಅಮೃತ್ ಶೆಣೈ, ಮುಖಂಡರಾದ ಪ್ರಸಾದ್ರಾಜ್ ಕಾಂಚನ್, ರಮೇಶ್ ಕಾಂಚನ್, ವಕೀಲರ ಸಂಘದ ಅಧ್ಯಕ್ಷ ರೆನೋಲ್ಡ್ ಪ್ರವೀಣ್ ಕುಮಾರ್, ಹರಿಪ್ರಸಾದ್ ರೈ, ಮುಹಮ್ಮದ್ ಮೌಲಾ, ಸುರೇಶ್ ಕಲ್ಲಾಗರ್, ಎಂ.ಎ.ಗಫೂರ್, ಮಂಜುಳಾ ನಾಯಕ್, ಪ್ರೊ.ಸುರೇಂದ್ರನಾಥ್ ಕೊಕ್ಕರ್ಣೆ, ಉದ್ಯಾವರ ನಾಗೇಶ್ ಕುಮಾರ್, ದಿನೇಶ್ ಮೊಳಹಳ್ಳಿ, ಇಸ್ಮಾಯಿಲ್ ಆತ್ರಾಡಿ ಮೊದಲಾದವರು ಉಪಸ್ಥಿತರಿದ್ದರು.