ಉಡುಪಿ: ಚರ್ಚುಗಳಲ್ಲಿ ಪೂಜೆ ಸಹಿತ ಹೊಸ ವರ್ಷಕ್ಕೆ ಸ್ವಾಗತ ಕೋರಿದ ಕ್ರೈಸ್ತ ಬಾಂಧವರು

Spread the love

ಉಡುಪಿ: ಚರ್ಚುಗಳಲ್ಲಿ ಪೂಜೆ ಸಹಿತ ಹೊಸ ವರ್ಷಕ್ಕೆ ಸ್ವಾಗತ ಕೋರಿದ ಕ್ರೈಸ್ತ ಬಾಂಧವರು

ಉಡುಪಿ: ನೂತನ 2024 ರ ವರ್ಷವನ್ನು ಉಡುಪಿ ಜಿಲ್ಲೆಯ ಕ್ರೈಸ್ತ ಭಾಂಧವರು ಪ್ರಾರ್ಥನೆ ಹಾಗೂ ಧನ್ಯವಾದ ಸಮರ್ಪಣೆಯೊಂದಿಗೆ ಸ್ವಾಗತಿಸಿದರು.

ಭಾನುವಾರ ಸಂಜೆ ವೇಳೆ ಇಗರ್ಜಿಗಳಿಗೆ ತೆರಳಿದ ಕ್ರೈಸ್ತ ಬಾಂಧವರು ಕಳೆದ 2023 ರ ವರ್ಷದಲ್ಲಿ ಸರ್ವರೀತಿಯಲ್ಲಿ ತಮ್ಮನ್ನು ಕಾಪಾಡಿದ್ದಕ್ಕಾಗಿ ದೇವರಿಗೆ ಕೃತಜ್ಞತೆ ಸಲ್ಲಿಸುವುದೊರಂದಿಗೆ ನೂತನ ವರ್ಷ ಪ್ರತಿಯೊಬ್ಬರ ಜೀವನದಲ್ಲಿ ಸುಖ ಶಾಂತಿ ನೆಮ್ಮದಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸಿದರು.

ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತಿ ವಂ|ಡಾ|ಜೆರಾಲ್ಡ್ ಐಸಾಕ್ ಲೋಬೊ ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್ ನಲ್ಲಿ ಭಾನುವಾರ ರಾತ್ರಿ ಪವಿತ್ರ ಬಲಿಪೂಜೆಯನ್ನು ಅರ್ಪಿಸಿದರು.

ನೂತನ ವರ್ಷದಲ್ಲಿ ದೇವರು ತೋರಿದ ಹಾದಿಯಲ್ಲಿ ನಡೆದು ವಿಶ್ವ ಶಾಂತಿಗಾಗಿ ಪ್ರತಿಯೊಬ್ಬರು ಪ್ರಾರ್ಥನೆ ಸಲ್ಲಿಸುವಂತೆ ಸಲಹೆ ನೀಡುವುದರೊಂದಿಗೆ ವಿಶ್ವಶಾಂತಿಗಾಗಿ ನಮ್ಮಿಂದಾಗುವ ಪ್ರಯತ್ನವನ್ನು ಮಾಡುವಂತೆ ಕ್ರೈಸ್ತ ಸಮುದಾಯಕ್ಕೆ ಕರೆ ನೀಡಿದರು.

ಪವಿತ್ರ ಬಲಿಪೂಜೆಯ ಮುಂಚಿತವಾಗಿ ಕಳೆದು ಹೋಗಲಿರುವ 2023ನೇ ವರ್ಷದಲ್ಲಿ ದೇವರು ಮಾಡಿದ ಎಲ್ಲಾ ರೀತಿಯ ಕ್ರಪಾವರಗಳಿಗೆ ದೇವರಿಗೆ ವಂದನೆಗಳನ್ನು ಅರ್ಪಿಸಿ ಪರಮ ಪ್ರಸಾದದ ವಿಶೇಷ ಆರಾಧನೆಯನ್ನು ನಡೆಸುವುದರೊಂದಿಗೆ 2024ರಲ್ಲಿ ವಿಶೇಷವಾಗಿ ಯುದ್ದಪೀಡಿತ ರಾಷ್ಟ್ರಗಳಲ್ಲಿ ಹಾಗೂ ಇಡೀ ವಿಶ್ವದಲ್ಲಿ ಶಾಂತಿ ನೆಲೆಸಲಿ ಎಂದು ಪ್ರಾರ್ಥಿಸಲಾಯಿತು.

ಮಿಲಾಗ್ರಿಸ್ ಕ್ಯಾಥೆಡ್ರಲ್ ನ ಪ್ರಧಾನ ಧರ್ಮಗುರು ವಂ| ವಲೇರಿಯನ್ ಮೆಂಡೊನ್ಸಾ, ಸಹಾಯಕ ಧರ್ಮಗುರು ವಂ |ಜೋಯ್ ಅಂದ್ರಾದೆ, ಅತಿಥಿ ಧರ್ಮಗುರುಗಳಾದ ವಂ|ಹೆಕ್ಟೆರ್ ಡಿಸೋಜಾ, ನಿತೇಶ್ ಡಿಸೋಜಾ, ವಂ|ರೋನ್ಸನ್ ಡಿಸೋಜಾ ಉಪಸ್ಥಿತರಿದ್ದರು.

ಜಿಲ್ಲೆಯ ಪ್ರಮುಖದ ಚರ್ಚುಗಳಾದ ಶಿರ್ವ ಆರೋಗ್ಯ ಮಾತೆಯ ದೇವಾಲಯದಲ್ಲಿ ಧರ್ಮಗುರು ವಂ|ಡಾ| ಲೆಸ್ಲಿ ಡಿ’ಸೋಜಾ, ಉಡುಪಿ ಶೋಕಮಾತಾ ಇಗರ್ಜಿಯಲ್ಲಿ ಧರ್ಮಗುರು ವಂ|ಚಾರ್ಲ್ಸ್ ಮಿನೇಜಸ್, ಕುಂದಾಪುರ ಹೋಲಿ ರೋಸರಿ ಚರ್ಚಿನಲ್ಲಿ ವಂ|ಸ್ಟ್ಯಾನಿ ತಾವ್ರೊ, ಕಾರ್ಕಳ ಅತ್ತೂರು ಸಂತ ಲಾರೆನ್ಸ್ ಬಾಸಿಲಿಕಾದಲ್ಲಿ ವಂ | ಆಲ್ಬನ್ ಡಿಸೋಜಾ, ತೊಟ್ಟಂ ಸಂತ ಅನ್ನಮ್ಮ ಚರ್ಚಿನಲ್ಲಿ ವಂ |ಡೆನಿಸ್ ಡೆಸಾ ಇವರುಗಳ ನೇತೃತ್ವದಲ್ಲಿ ಹೊಸ ವರ್ಷ ಆಚರಣೆಯ ಪ್ರಯುಕ್ತ ಬಲಿಪೂಜೆಗಳು ನಡೆದವು

ಹೊಸ ವರ್ಷಾಚರಣೆ ಸ್ವಾಗತಿಸುವ ಅಂಗವಾಗಿ ಚರ್ಚುಗಳಲ್ಲಿ ಯುವ ಸಂಘಟನೆಯ ಸದಸ್ಯರಿಂದ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮ, ಕೇಕ್ ವಿತರಣೆ ಕೂಡ ನಡೆಯಿತು. ಬಲಿಪೂಜೆಯ ಬಳಿಕ ಕ್ರೈಸ್ತ ಭಾಂಧವರು ಪರಸ್ಪರ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು.


Spread the love