ಕೊಲೆ ಪ್ರಕರಣ: ನಟ ಚಾಲೆಂಜಿಂಗ್ ಸ್ಟಾರ್‌ ದರ್ಶನ್‌ ಬಂಧನ

Spread the love

ಕೊಲೆ ಪ್ರಕರಣ: ನಟ ಚಾಲೆಂಜಿಂಗ್ ಸ್ಟಾರ್‌ ದರ್ಶನ್‌ ಬಂಧನ
 
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್‌ ಅವರನ್ನು ಬಂಧಿಸಲಾಗಿದೆ. ಮೈಸೂರಿಲ್ಲಿ ಪೊಲೀಸರು ದರ್ಶನ್‌ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.

ಕೊಲೆ ಪ್ರಕರಣದಲ್ಲಿ ಮೈಸೂರಿನ ಫಾರ್ಮ್​​ಹೌಸ್​ನಲ್ಲಿ ದರ್ಶನ್‌ ಅವರನ್ನು ಬಂಧಿಸಲಾಗಿದೆ. ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಎನ್ನುವವರ ಕೊಲೆ ಪ್ರಕರಣದಲ್ಲಿ ಆರೋಪಿಯನ್ನಾಗಿ ನಟ ದರ್ಶನ್‌ ಅವರನ್ನು ಬಂಧಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ದರ್ಶನ್‌ ಸೇರಿದಂತೆ 10 ಮಂದಿಯನ್ನು ಪ್ರಕರಣ ಸಂಬಂಧ ಬಂಧಿಸಲಾಗಿದೆ.

ಏನಿದು ಪ್ರಕರಣ?: ನಟ ದರ್ಶನ್‌ ಅವರಿಗೆ ಆತ್ಮೀಯವಾಗಿರುವ ನಟಿ ಪವಿತ್ರ ಗೌಡ ಅವರ ಫೋಟೋಗಳಿಗೆ ರೇಣುಕಾ ಸ್ವಾಮಿ ಸಾಮಾಜಿಕ ಜಾಲತಾಣದಲ್ಲಿ ಆಶ್ಲೀಲವಾಗಿ ಕಮೆಂಟ್‌ ಮಾಡುತ್ತಿದ್ದ. ಇದಲ್ಲದೆ ಕೆಟ್ಟದಾಗಿ ಮೆಸೇಜ್‌ ಮಾಡುತ್ತಿದ್ದ ಎನ್ನಲಾಗಿದೆ.

ಚಿತ್ರದುರ್ಗದಿಂದ ರೇಣುಕಾ ಸ್ವಾಮಿಯನ್ನು ಕರೆಯಲಾಗಿತ್ತು. ಜೂ. 8ರಂದು ರಾತ್ರಿ ವಿನಯ್‌ ಎನ್ನುವವರ ಶೆಡ್‌ ಗೆ ಕರೆತಂದು ಬಲವಾಧ ಆಯುಧದಿಂದ ರೇಣುಕಾ ಅವರಿಗೆ ಹೊಡೆದು ಕೊಲೆಗೈದು, ಮೃತದೇಹನ್ನು ಮೋರಿಗೆ ಎಸೆಯಲಾಗಿತ್ತು. ಘಟನೆ ಸಂದರ್ಭದಲ್ಲಿ ದರ್ಶನ್‌ ಅವರು ಸ್ಥಳದಲ್ಲೇ ಇದ್ದರು ಎನ್ನಲಾಗಿದೆ.

ದರ್ಶನ್‌ ಸೇರಿದಂತೆ ನಾಲ್ವರು ರೇಣುಕಾ ಸ್ವಾಮಿಗೆ ಹಲ್ಲೆ ಮಾಡಿ ಕೊಲೆಗೈದಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಪೊಲೀಸರಿಗೆ ಮೃತದೇಹ ಸಿಕ್ಕಾಗ ತನಿಖೆ ಶುರುವಾಗಿದೆ. ಈ ಪ್ರಕರಣದಲ್ಲಿ ಮೂವರು ಮೊದಲು ಠಾಣೆಗೆ ಬಂದು ನಾವೇ ಕೊಲೆ ಮಾಡಿದ್ದು, ಹಣಕಾಸಿನ ವಿಚಾರದಲ್ಲಿ ಈ ಕೊಲೆಯನ್ನು ಮಾಡಿದ್ದೇವೆ ಎಂದು ಹೇಳಿದ್ದಾರೆ. ಆದರೆ ಪೊಲೀಸರಿಗೆ ಈ ಬಗ್ಗೆ ಸಂಶಯ ಉಂಟಾಗಿದೆ. ಮತ್ತಷ್ಟು ಆಳವಾಗಿ ತನಿಖೆಗೆ ಇಳಿದಾಗ ಹಿಂದಿನ ಕಾರಣ ತಿಳಿದು ಬಂದಿದೆ.

ಶೆಡ್‌ ವೊಂದರಲ್ಲಿ ರೇಣುಕಾ ಸ್ವಾಮಿ ಅವರ ಕೊಲೆಯಾಗಿತ್ತು. ಮೊದಲಿಗೆ ಇದೊಂದು ಆತ್ಮಹತ್ಯೆ ಪ್ರಕರಣವೆನ್ನಲಾಗಿತ್ತು. ಆದರೆ ತನಿಖೆಯ ಬಳಿಕ ಇದೊಂದು ಕೊಲೆ ಎನ್ನುವುದು ಗೊತ್ತಾಗಿದೆ.

ಸದ್ಯ ದರ್ಶನ್‌ ಅವರನ್ನು ಬೆಂಗಳೂರಿಗೆ ಕರೆತರಲಾಗುತ್ತಿದೆ ಎನ್ನಲಾಗಿದೆ.


Spread the love