ಜ.22ರಂದು ನಗರಾದ್ಯಂತ ಬಿಗಿ ಬಂದೋಬಸ್ತ್: ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್

Spread the love

ಜ.22ರಂದು ನಗರಾದ್ಯಂತ ಬಿಗಿ ಬಂದೋಬಸ್ತ್: ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್
 

ಮಂಗಳೂರು: ಅಯೋಧ್ಯೆಯ ಶ್ರೀರಾಮ ಮಂದಿರದ ನೂತನ ಕಟ್ಟಡದಲ್ಲಿ ಜ.22ರಂದು ಶ್ರೀರಾಮನ ಮೂರ್ತಿ ಪ್ರತಿಷ್ಠಾಪನೆ ಪ್ರಯುಕ್ತ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ವ್ಯಾಪಕ ಬಂದೋಬಸ್ತ್ ಮಾಡಲಾಗಿದೆ ಎಂದು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಸಾರ್ವಜನಿಕ ಹಿತದೃಷ್ಟಿಯಿಂದ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಹಲವು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ನಗರ ವ್ಯಾಪ್ತಿಯ 196 ಸ್ಥಳಗಳಲ್ಲಿರುವ ದೇವಸ್ಥಾನ ಮತ್ತು ಮಂದಿರಗಳಲ್ಲಿ ಪೂಜೆ, ಧಾರ್ಮಿಕ ಕಾರ್ಯಕ್ರಮ ನಡೆಯುವ ಸ್ಥಳಗಳನ್ನು ಗುರುತಿಸಲಾಗಿದೆ.

  • ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ 3 ಡಿಸಿಪಿ, 6 ಎಸಿಪಿ, 11 ಪಿಐ ಮತ್ತು 37 ಎಸ್ಸೈ ದರ್ಜೆಯ ಅಧಿಕಾರಿಗಳನ್ನು ಹಾಗೂ 781 ಪೊಲೀಸ್ ಸಿಬ್ಬಂದಿಗಳನ್ನು ಬಂದೋಬಸ್ತ್ ಕರ್ತವ್ಯಕ್ಕೆ ನಿಯೋಜಿಸಲಾಗಿದೆ.
  • 131 ಸೂಕ್ಷ್ಮಪ್ರದೇಶಗಳಲ್ಲಿ ಹಗಲು ರಾತ್ರಿ ಪಿಕೆಟಿಂಗ್ ನೇಮಿಸಿ ಅಧಿಕಾರಿಗಳನ್ನು ನಿಯೋಜಿಸಲಾಗಿದೆ.
  • ನಗರದಾದ್ಯಂತ 57 ಸೆಕ್ಟರ್ ಮೊಬೈಲ್‌ಗಳನ್ನು ಹಗಲು ರಾತ್ರಿ ಗಸ್ತಿನಲ್ಲಿರುವ ವ್ಯವಸ್ಥೆಯನ್ನು ಮಾಡಲಾಗಿದೆ.
  • 14 ಸ್ಥಳಗಳಲ್ಲಿ ಚೆಕ್ ಪಾಯಿಂಟ್‌ಗಳನ್ನು ನಿಯೋಜಿಸಲಾಗಿದೆ.
  • 9 ಸಿಎಆರ್ ಮತ್ತು 3 ಕೆಎಸ್‌ಆರ್‌ಪಿ ತುಕಡಿಗಳನ್ನು ನಿಯೋಜಿಸಲಾಗಿದೆ.
  • ತಡರಾತ್ರಿ ಮತ್ತು ಮುಂಜಾನೆ ವಿಶೇಷ ಗಸ್ತುಗಳನ್ನು ಆಯೋಜಿಸಲಾಗಿದೆ.
  • ನಗರದ ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ವಿದ್ವಂಸಕ ತಪಾಸಣಾ ತಂಡದಿಂದ ತಪಾಸಣೆ ನಡೆಸಲಾಗುತ್ತಿದೆ.
  • ಯಾವುದೇ ರೀತಿಯ ಮೆರವಣಿಗೆ, ರ್ಯಾಲಿಗಳಿಗೆ ಅವಕಾಶ ಇಲ್ಲ.
  • ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಸಹಾಯಕ ಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ ಶಾಂತಿ ಸಭೆಗಳನ್ನು ಆಯೋಜಿಸಲಾಗಿದೆ.
  • ಪ್ರತೀ ಪೊಲೀಸ್ ಠಾಣಾ ಮಟ್ಟದಲ್ಲಿ ಸಾರ್ವಜನಿಕರಲ್ಲಿ ವಿಶ್ವಾಸ ಮೂಡಿಸುವಲ್ಲಿ ಏರಿಯಾ ಡಾಮಿನೇಷನ್ ಮತ್ತು ರೂಟ್ ಮಾರ್ಚ್ ಕೈಗೊಳ್ಳಲಾಗಿದೆ.
  • ಮಹಾನಗರ ಪಾಲಿಕೆಯೊಂದಿಗೆ ಸಮನ್ವಯ ಸಾಧಿಸಿ ಫ್ಲೆಕ್ಸ್, ಬ್ಯಾನರ್, ಬಂಟಿಂಗ್ಸ್ ಅಳವಡಿಕೆಗಳ ಮೇಲೆ ಸೂಕ್ತ ನಿಗಾ ಇರಿಸಲಾಗಿದೆ. ಮತ್ತು ಆಯೋಜಕರಿಗೆ ಅವುಗಳ ಭದ್ರತೆಯನ್ನು ಖಚಿತಪಡಿಸಲು ಸೂಚಿಸಲಾಗಿದೆ.
  • ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಜ.21ರ ಮಧ್ಯರಾತ್ರಿಯಿಂದ 23ರ ಮುಂಜಾನೆಯವರೆಗೆ ಎಲ್ಲಾ ರೀತಿಯ ಬಾರ್‌ಗಳು ಮತ್ತು ಮದ್ಯ ಮಾರಾಟ ಮಳಿಗೆಗಳನ್ನು ಮುಚ್ಚಿಸುವಂತೆ ಜಿಲ್ಲಾಧಿಕಾರಿಗಳಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ.

Spread the love